Sidlingu 2: ಕನ್ನಡ ಚಿತ್ರರಂಗದ ನಿರೀಕ್ಷೆಯ ಚಿತ್ರಗಳಲ್ಲೊಂದಾದ ಯೋಗಿ ಅಭಿನಯದ ಮತ್ತು ವಿಜಯಪ್ರಸಾದ್ ನಿರ್ದೇಶನದ ‘ಸಿದ್ಲಿಂಗು 2’ ಚಿತ್ರವು ಫೆಬ್ರವರಿ 14ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಪ್ರೀ-ರಿಲೀಸ್ ಇವೆಂಟ್ ಭಾನುವಾರ ರಾತ್ರಿ ನಗರದ MMB Legacyಯಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಯೋಗಿ ಅವರ ಮಾವ, ‘ಸ್ಯಾಂಡಲ್ವುಡ್ ಸಲಗ’ ಎಂದೇ ಖ್ಯಾತರಾಗಿರುವ ‘ದುನಿಯಾ’ ವಿಜಯ್ ಬಂದು ಚಿತ್ರದ ‘ಚುರುಮುರಿ’ ಎಂಬ ಹಾಡು ಬಿಡುಗಡೆ ಮಾಡಿಕೊಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ವಿಜಯ್ ಕುಮಾರ್, ‘ನಾನು ಹೀರೋ ಆಗುವ ಮುನ್ನ ವಿಜಯಪ್ರಸಾದ್ ತಮ್ಮ ಧಾರಾವಾಹಿಗಳಲ್ಲಿ ಸಣ್ಣ ಪಾತ್ರಗಳನ್ನು ಕೊಟ್ಟು ಬೆಳೆಸಿದರು. ಅವರೊಬ್ಬ ವಿದ್ಯಾವಂತ ನಿರ್ದೇಶಕ. ಇಡೀ ಕರ್ನಾಟಕದ ಮನೆಮನೆಯವರನ್ನು ‘ಸಿಲ್ಲಿ ಲಲ್ಲಿ’ ನೋಡುವಂತೆ ಮಾಡಿದರು. ಈಗ ಇಡೀ ಕುಟುಂಬ ನೋಡುವಂತಹ ಸಿನಿಮಾ ಮಾಡಿದ್ದಾರೆ. ಹೊಡಿ-ಬಡಿ ಸಿನಿಮಾಗಳ ಮಧ್ಯೆ ಒಳ್ಳೆಯ ಸಿನಿಮಾ ಬರುತ್ತಿದೆ ಎಂಬುದರ ಸೂಚನೆ ಇಲ್ಲಿದೆ. ಯೋಗಿಗೆ ಸಿನಿಮಾ ಮಾಡಿದ್ದಿಕ್ಕೆ ಧನ್ಯವಾದಗಳು. ಇದು ಇನ್ನೂ ಸಹ ಮುಂದುವರೆಯಲಿ. ಇನ್ನೊಂದು ಒಳ್ಳೆಯ ಕಥೆಯ ಮೂಲಕ ‘ಸಿದ್ಲಿಂಗು 3’ ಮಾಡಲಿ ಎಂಬುದು ನನ್ನಾಸೆ’ ಎಂದರು.
ನಾನು ಯೋಗಿಯ ದೊಡ್ಡ ಅಭಿಮಾನಿ ಎಂದ ವಿಜಯ್ ಕುಮಾರ್, ‘ಯಾವುದೇ ಪಾತ್ರವಿದ್ದರೂ ನಾನು ಮಾಡಬಲ್ಲೆ ಎಂದು ಧೈರ್ಯವಾಗಿ ನಿಲ್ಲುತ್ತಾನೆ. ಅವನ ಸಾಮರ್ಥ್ಯ ಬೇರೆ ಇದೆ. ಅವನಿಗೆ ಒಳ್ಳೆಯ ಕಥೆಗಳು ಸಿಕ್ಕಿ ಅವನು ಇನ್ನೂ ಅದ್ಭುತ ನಟನಾಗಿ ಹೊರಹೊಮ್ಮಬೇಕು ಎಂಬುದು ನನ್ನಾಸೆ. ಅದಕ್ಕೆ ಇನ್ನೂ ಸಮಯ ಬರಬೇಕೇನೋ? ಬರದಿದ್ದರೆ ನಾನು ಅವನ ಜೊತೆಗೆ ನಿಲ್ಲುತ್ತೇನೆ. ಯಾವತ್ತೂ ಅವನ ಕೈಬಿಡುವುದಿಲ್ಲ. ಅವನನ್ನು ನಿಲ್ಲಿಸುತ್ತೇನೆ. ನನ್ನ ಕೈಗೆ ಸಿಕ್ಕರೆ ಬೇರೆಯದನ್ನೇ ಮಾಡುತ್ತೇನೆ. ಬೇರೆ ಏನನ್ನೋ ತೋರಿಸುವುದಕ್ಕೆ ಆಸೆ. ಈ ಚಿತ್ರದಲ್ಲಿ ಒಂದು ಒಳ್ಳೆಯ ವೈಬ್ ಇದೆ. ಒಳ್ಳೆಯ ಕಲಾವಿದರು ಮತ್ತು ತಂತ್ರಜ್ಞರು ಈ ತಂಡದಲ್ಲಿದ್ದಾರೆ’ ಎಂದರು.
ಚಿತ್ರದ ನಾಯಕ ಯೋಗಿ ಮಾತನಾಡಿ, ‘‘ಸಿದ್ಲಿಂಗು’ ಚಿತ್ರವನ್ನು ನೋಡಿ ಎಲ್ಲರೂ ಇಷ್ಟಪಟ್ಟಿದ್ದರು. ಭಾಗ ಎರಡು ಸಹ ಎಲ್ಲರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆ ನನಗೆ ಮತ್ತು ಚಿತ್ರತಂಡಕ್ಕಿದೆ. ಆಗ ‘ಸಿದ್ಲಿಂಗು’, ಕನ್ನಡ ಚಿತ್ರರಂಗಕ್ಕೆ ಬೇರೆ ತರಹದ ಸಿನಿಮಾ ಆಯ್ತು. ಇದು ಅದರ ಮುಂದುವರೆದ ಭಾಗ. ವಿಜಯಪ್ರಸಾದ್ ಜೊತೆಗೆ ಕೆಲಸ ಮಾಡುವುದು ಖುಷಿಯ ವಿಷಯ. ಪ್ರತಿಯೊಬ್ಬರಿಂದ ಒಳ್ಳೆಯ ಕೆಲಸ ತೆಗೆಯುತ್ತಾರೆ. ನನ್ನನ್ನು ಮತ್ತು ವಿಜಯಪ್ರಸಾದ್ ಅವರನ್ನು ಯಾರೂ ನಂಬದಂತಹ ಸಮಯದಲ್ಲಿ ಹರಿ ಮತ್ತು ರಾಜು ಅವರು ನಮ್ಮನ್ನು ನಂಬಿ ಚಿತ್ರ ನಿರ್ಮಿಸುವುದಕ್ಕೆ ಮುಂದೆ ಬಂದರು. ನಾನು ಬದುಕಿರುವವರೆಗೂ ಅವರಿಗೆ ಚಿರಋಣಿ. ಇವತ್ತು ಟ್ರೇಲರ್ ಬಿಡುಗಡೆ ಮಾಡುವುದಕ್ಕೆ ನಮ್ಮ ಮಾವ ಬಂದಿದ್ದಾರೆ. ನಾನು ಚಿಕ್ಕ ವಯಸ್ಸಲ್ಲಿ ವಿಜಯ್ ಅವರನ್ನು ಮಾವ ಅಂತ ಕರೆದರೆ, ಹೊಡೆದು ಕುಮಾರ ಅಂತ ಕರೆಯೋ ಎನ್ನುತ್ತಿದ್ದರು. ಇವತ್ತು ಮೊದಲ ಬಾರಿಗೆ ವೇದಿಕೆಯೊಂದರ ಮೇಲೆ ನಿಂತು ಮಾವ ಎಂದು ಕರೆಯುತ್ತಿದ್ದೇನೆ. ಇನ್ನು ಮುಂದೆ ಎಲ್ಲೇ ಸಿಕ್ಕರೂ ಮಾವ ಎಂದು ಕರೆಯುತ್ತೇನೆ. ನಮ್ಮ ಚಿತ್ರತಂಡದವರೆಲ್ಲಾ ಅವರನ್ನು ಕರೆಸಿ ಪ್ರೀ-ರಿಲೀಸ್ ಇವೆಂಟ್ ಮಾಡಬೇಕು ಎಂದು ಹೇಳುತ್ತಿದ್ದರು. ಅವರೂ ಒಪ್ಪಿ ಇವತ್ತು ಬಂದು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅವರಿಗೆ ಧನ್ಯವಾದಗಳು’ ಎಂದರು.
ಸಿದ್ಲಿಂಗು ಸಮಾಜಕ್ಕೆ ಸತ್ಪುರುಷ ಅಲ್ಲ ದೇಶಕ್ಕೆ ಸತ್ಪ್ರಜೆ ಎಂದ ನಿರ್ದೇಶಕ ವಿಜಯಪ್ರಸಾದ್, ‘ಕಾಯಕ ಎಂದರೆ ಅವನನ್ನು ನೆನಪು ಮಾಡಿಕೊಳ್ಳಬೇಕು, ಆದರ್ಶ ಎಂದರೆ ಮರೆತುಬಿಡಿಬೇಕು. ಅಂಥದ್ದೊಂದು ಜೀವಂತ ಪಾತ್ರ ಈ ಚಿತ್ರದಲ್ಲಿ ಮಾಡಿದ್ದಾರೆ’ ಎಂದರು.
ಈ ಸಂದರ್ಭದಲ್ಲಿ ಯೋಗಿ ತಂದೆ ಮತ್ತು ನಿರ್ಮಾಪಕ ಟಿ.ಪಿ. ಸಿದ್ಧರಾಜು, ನಾಯಕಿ ಸೋನು ಗೌಡ, ನಟ-ನಿರ್ದೇಶಕ ಬಿ. ಸುರೇಶ, ಮಂಜುನಾಥ್ ಹೆಗಡೆ, ಸೀತಾ ಕೋಟೆ, ಸಂಗೀತ ನಿರ್ದೇಶಕ ಅನೂಪ್ ಸೀಳಿನ್, ಗೀತರಚನೆಕಾರ ಅರಸು ಅಂತಾರೆ, ಆ್ಯಂಥೋನಿ ಕಮಲ್ ಸೇರಿದಂತೆ ಚಿತ್ರತಂಡದ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಹಾಜರಿದ್ದರು. ವಿಜಯ್ ಕುಮಾರ್ ಅವರನ್ನು ಇದೇ ಸಂದರ್ಭದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.
‘ಸಿದ್ಲಿಂಗು 2’ ಚಿತ್ರವನ್ನು ಶ್ರೀಹರಿ ಮತ್ತು ರಾಜು ಶೇರಿಗಾರ್ ನಿರ್ಮಿಸಿದ್ದು, ಯೋಗಿ, ಸೋನು ಗೌಡ, ಸುಮನ್ ರಂಗನಾಥ್, ಸೀತಾ ಕೋಟೆ, ಮಹಾಂತೇಶ್, ಆ್ಯಂಟೋನಿ ಕಮಲ್, ಮಂಜುನಾಥ ಹೆಗಡೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಪ್ರಸನ್ನ ಗುರ್ಲಕೆರೆ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ಮತ್ತು ಅಕ್ಷಯ್ ಪಿ. ರಾವ್ ಅವರ ಸಂಕಲನವಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.